Showing posts with label ಭಗವದ್ಗೀತೆ. Show all posts
Showing posts with label ಭಗವದ್ಗೀತೆ. Show all posts

ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ?

ಸಾಧನೆಯ ಬಗ್ಗೆ ಹೇಳುವ ಮೊದಲು ಕೃಷ್ಣ ನಮಗೆ ಬರಬಹುದಾದ ಒಂದು ಸಂಶಯವನ್ನು ಭಗವದ್ಗೀತೆಯ ಎರಡನೆಯ ಅಧ್ಯಾಯದ ಈ ಶ್ಲೋಕದಲ್ಲಿ ಪರಿಹರಿಸಿದ್ದಾನೆ.

ನೇಹಾಭಿಕ್ರಮನಾಶೋSಸ್ತಿ ಪ್ರತ್ಯವಾಯೋ ನ ವಿದ್ಯತೇ ।
ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್  ॥೪೦॥

ಎಲ್ಲರನ್ನೂ  ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ: ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು! ಇದರಿಂದ ಏನು ಉಪಯೋಗ. ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ ಸಾಧನೆ ವ್ಯರ್ಥವೇ? ಖಂಡಿತವಾಗಿ ಇಲ್ಲ ಎನ್ನುತ್ತಾನೆ ಕೃಷ್ಣ. ನಮ್ಮ ಜೀವನದಲ್ಲಿ ಗಳಿಸಿದ ಐಹಿಕ ಸಂಪತ್ತು (ಧನ, ಒಡವೆ, ಕೀರ್ತಿ, ಆಸ್ತಿ ಇತ್ಯಾದಿ) ಸತ್ತ ನಂತರ ನಮ್ಮೊಂದಿಗೆ ಬಾರದು ನಿಜ. ಆದರೆ ಅಧ್ಯಾತ್ಮ ಸಾಧನೆ ಹಾಗಲ್ಲ. ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಾಶವಾಗದು. ಈ ಜನ್ಮದಲ್ಲಿ ಅಧ್ಯಾತ್ಮದ ಒಂದು ಮೆಟ್ಟಿಲನ್ನು ಹತ್ತಿದರೆ ಮುಂದಿನ ಜನ್ಮದಲ್ಲಿ ಹುಟ್ಟುವಾಗಲೇ ನಾವು ಎರಡನೇ ಮೆಟ್ಟಲಲ್ಲಿರುತ್ತೇವೆ. ಹಿಂದಿನ ಜನ್ಮದಲ್ಲಿ ಎಲ್ಲಿ ನಿಂತಿದ್ದೇವೋ ಅಲ್ಲಿಂದ ಮುಂದುವರಿಯುವ ಪರಿಸರದಲ್ಲಿ ನಮ್ಮ ಜನನವಾಗುತ್ತದೆ. ಸಾಮಾಜಿಕವಾಗಿ ನೀವು ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳು ಜನಿಸುವುದನ್ನು, ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಮಹಾನ್ ಸಾಧನೆ ಮಾಡುವುದನ್ನು ಕಾಣುತ್ತೀರಿ. ಇದು ಅವರು ಹಿಂದಿನ ಜನ್ಮದಿಂದ ಪಡೆದು ಬಂದ ಜ್ಞಾನ. ಹಿಂದಿನ ಜನ್ಮದ ಅಧ್ಯಾತ್ಮದ ಸಾಧನೆಯ ಮುಂದುವರಿದ ಭಾಗವೇ ಈ ಜನ್ಮ. ನಾವು ಆ ಜನ್ಮದಲ್ಲಿ ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದಲೇ ಈ ಜನ್ಮದ ಸಾಧನೆ ಪ್ರಾರಂಭವಾಗಿ ಮುಂದುವರಿಯುತ್ತದೆ.

ಒಂದು ವೇಳೆ ನಮಗೆ ಅಧ್ಯಾತ್ಮ ಸಾಧನೆ ಮಾಡಬೇಕು ಎನ್ನುವ ಅಂತರಂಗದ ತುಡಿತವಿದ್ದು, ಅದನ್ನು ಈ ಜನ್ಮದಲ್ಲಿ ಸಾಧಿಸಲಾಗದಿದ್ದಲ್ಲಿ ಮುಂದಿನ ಜನ್ಮದಲ್ಲಿ ಸಾಧನೆಗೆ ಬೇಕಾದ ವಾತಾವರಣದಲ್ಲಿ, ವಿದ್ವಾಂಸರ ಸಂಗವಿರುವ ಕಡೆ ನಮ್ಮ ಜನ್ಮವಾಗುತ್ತದೆ. ಆದ್ದರಿಂದ ನಮ್ಮ ಅಧ್ಯಾತ್ಮ ಚಿಂತನೆಯಲ್ಲಿ ನಮ್ಮ ಒಂದೊಂದು ಜನ್ಮ ಒಂದೊಂದು ತರಗತಿ ಇದ್ದಂತೆ. ಒಂದು ಗ್ರಂಥವನ್ನು ಸಂಪೂರ್ಣ ತಿಳಿಯಲು ನಾವು ಅನೇಕ  ಜನ್ಮ ಸಾಧನೆ  ಮಾಡಬೇಕು. ಈ ಕಾರಣದಿಂದ ಅಧ್ಯಾತ್ಮ ಸಾಧನೆ ಎಂದೂ ವ್ಯರ್ಥವಲ್ಲ. ಇಂದು ನೀವು ನಿಮ್ಮ ಜೀವನದ ಯಾವ ಘಟ್ಟದಲ್ಲಿದ್ದರೂ ಸರಿ, ಅಧ್ಯಾತ್ಮ ಸಾಧನೆಗೆ ಇದು ಸಕಾಲ. ಇಂದೇ ನಿಮ್ಮ ಸಾಧನೆಯನ್ನು  ಆರಂಭಿಸಿ. ಅದು ನಿಮ್ಮನ್ನು ಮೋಕ್ಷ ಮಾರ್ಗದತ್ತ ಕೊಂಡೊಯ್ಯುತ್ತದೆ ಎನ್ನುವುದು ಕಟುಸತ್ಯ. ಅಧ್ಯಾತ್ಮ ಪ್ರದರ್ಶನದ ವಸ್ತುವಲ್ಲ, ಅದು ಅಂತರಂಗದ ಸಾಧನೆ. ನಮ್ಮ ಜನ್ಮದಲ್ಲಿ ನಾವು ಅಧ್ಯಾತ್ಮದ ಕಿಂಚಿತ್ ಸಾಧನೆ ಮಾಡಿದರೂ ಕೂಡಾ, ಅದು ನಮ್ಮನ್ನು ಭಯದಿಂದ ಪಾರು ಮಾಡುತ್ತದೆ. ಭಯದಿಂದ ಅಭಯದತ್ತ ನಮ್ಮನ್ನು ಸಾಗಿಸುವ ಏಕಮಾತ್ರ ಸಾಧನ ಅಧ್ಯಾತ್ಮ.

ಆಧಾರ: ಭಗವದ್ಗೀತಾ

ಇತರ ವಿಷಯಗಳು
ನಾವು ಮಾಡಿದ ಪಾಪ ಕರ್ಮದ ಫಲವನ್ನು ನಾವೇ ಅನುಭವಿಸಬೇಕು
ಎಲ್ಲವನ್ನೂ ಭಗವಂತನೇ ಮಾಡುವುದಾದರೆ ಪಾಪ ಕರ್ಮಗಳು ನಮಗೇಕೆ?
ಹಿಂದೂ ಧರ್ಮ ಪ್ರತಿಮಾ ಪೂಜೆಯನ್ನು ಹೇಳುತ್ತದೆಯೇ? ಪ್ರತಿಮೆಯೇ ಭಗವಂತನೇ?
ಶಿಷ್ಯನ ಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವ!
ಮೂರ್ತಿ ಪೂಜೆ
ಸ್ತ್ರೀಯರು, ಶೂದ್ರರು... ಭಗವದ್ಗೀತೆ, ವಿಷ್ಣು ಸಹಸ್ರನಾಮ ಪಾರಾಯಣ ಮಾಡಬಹುದೇ?
ಸಂಸಾರಿಗಳಿಗೆ ಸಾಕ್ಷಾತ್ಕಾರ ಹೇಗೆ ಸಾಧ್ಯ?

ಎಲ್ಲವನ್ನೂ ಭಗವಂತನೇ ಮಾಡುವುದಾದರೆ ಪಾಪ ಕರ್ಮಗಳು ನಮಗೇಕೆ?

'ನಮಗೆ ಸ್ವತಂತ್ರವಾದ ಕರ್ತೃತ್ವವಿಲ್ಲ, ನಾವು ಆತನ ಅಧೀನ' ಎನ್ನುವ ವಿಚಾರದಲ್ಲಿ ನಾವು ಸದಾ ಗೊಂದಲಕ್ಕೊಳಗಾಗುತ್ತೇವೆ. ಎಲ್ಲವನ್ನೂ ಭಗವಂತನೇ ಮಾಡುವುದಾದರೆ ಪಾಪ ಕರ್ಮಗಳು ನಮಗೇಕೆ ಅನ್ನುವ ಪ್ರಶ್ನೆ ಹೆಚ್ಚಿನವರನ್ನು ಕಾಡುತ್ತದೆ. ಎಷ್ಟು ಅಧ್ಯಯನ ಮಾಡಿದರೂ ಈ ಕರ್ಮಸಿದ್ಧಾಂತ ಅರ್ಥವಾಗುವುದಿಲ್ಲ.  ಇದಕ್ಕೆ ಕಾರಣ ಅರಿವಿನ ಅಭಾವ. ಈ ಅರಿವು ಕೇವಲ ಓದುವುದರಿಂದ ಬರುವುದಿಲ್ಲ. ಅದನ್ನು ಗ್ರಹಿಸಿ-ಗ್ರಹಿಸಿ, ಅನುಭವಿಸಿ ಮನವರಿಕೆ ಮಾಡಿಕೊಳ್ಳಬೇಕು. ಇದನ್ನು ಕೃಷ್ಣ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಮುಂದಿನ ಶ್ಲೋಕದಲ್ಲಿ ವಿವರಿಸಿದ್ದಾನೆ.

ಜ್ಞಾನೇನ ತು ತದಜ್ಞಾನಂ ಯೇಷಾಂ ನಾಶಿತಮಾತ್ಮನಃ ।
ತೇಷಾಮಾದಿತ್ಯವಜ್ ಜ್ಞಾನಂ ಪ್ರಕಾಶಯತಿ ತತ್ ಪರಮ್    ॥೫.೧೬॥

ನಾವು ನಮ್ಮ ಗೊಂದಲವನ್ನು ಪರಿಹರಿಸಿಕೊಳ್ಳಲು ಇರುವುದು ಕೇವಲ ಒಂದೇ ಮಾರ್ಗ. ಜ್ಞಾನ ಮಾರ್ಗದಲ್ಲಿ ಸಾಧನೆ ಮಾಡಿ ಸತ್ಯವನ್ನು ತಿಳಿದುಕೊಳ್ಳುವುದು. ನಮ್ಮ ಸಮಸ್ಯೆ ಅಂದರೆ ನಮ್ಮೊಳಗೆ ಇರುವ ಜೀವ ಸ್ವರೂಪದಲ್ಲಿ ಜ್ಞಾನವಿದೆ-ಆದರೆ ಅದನ್ನು ಅಜ್ಞಾನವೆಂಬ ಮಸುಕು ಕವಿದಿದೆ. ನಾವು ನಮ್ಮ ಜೀವ ಸ್ವರೂಪವನ್ನು ಅಜ್ಞಾನವೆಂಬ ಪೆಟ್ಟಿಗೆಯೊಳಗೆ ಭದ್ರವಾಗಿ ಮುಚ್ಚಿಟ್ಟಿದ್ದೇವೆ. ಜ್ಞಾನಕ್ಕೆ ಮುಚ್ಚಳ-ಅಜ್ಞಾನದ್ದು ಹಾಗೂ ನಮಗೆ ಆ ಮುಚ್ಚಳವನ್ನು ತೆಗೆಯಲು ಇಷ್ಟವಿಲ್ಲ.

ನಾವು  ಮೊದಲು ತಿಳಿಯಬೇಕಾದ ಸಂಗತಿ 'ನಾನು ಅಂದರೆ ಏನು' ಎನ್ನುವುದನ್ನು. ಅದು ಗೊತ್ತಾದಾಗ ನನ್ನ ಸೀಮಿತತೆ ಏನು, ನನ್ನ ಶಕ್ತಿ ಏನು, ನನ್ನ ಅಲ್ಪತ್ವವೇನು ಎನ್ನುವುದು ತಿಳಿಯುತ್ತದೆ. ನಮ್ಮ ಇಂದ್ರಿಯದ ಒಡೆತನ ನಮಗಿಲ್ಲ; ನಮ್ಮ ಮನಸ್ಸು ನಾವು ಹೇಳಿದಂತೆ ಕೇಳುವುದಿಲ್ಲ. ಆದ್ದರಿಂದ ನಾನು ಇವೆಲ್ಲವುದರ ಜೊತೆಗಿದ್ದೇನೆ, ಯಾರೋ ಇದನ್ನೆಲ್ಲಾ ಇಲ್ಲಿ ಇಟ್ಟಿದ್ದಾರೆ; ಇಂದ್ರಿಯದಿಂದ ಅನುಭವ ಬರುತ್ತದೆ ನಾನು ಅನುಭವಿಸುತ್ತೇನೆ ಎನ್ನುವ ಅರಿವು ಮೂಡುತ್ತದೆ.  ಈ ಇಂದ್ರಿಯಗಳನ್ನು ಕೊಟ್ಟವನ್ಯಾರು, ಅದರಿಂದ ಅನುಭವ ಕೊಡುವವನ್ಯಾರು ಎನ್ನುವುದು ಅರ್ಥವಾದಾಗ, ತಾನು ಕೇವಲ ಪ್ರತಿಬಿಂಬ ಮತ್ತು ಮೂಲ ಬಿಂಬ ಭಗವಂತ ಎನ್ನುವ ಅರಿವು ಮೂಡುತ್ತದೆ.

ನಾವು ಹೇಗೆ ನಮ್ಮ ಅಜ್ಞಾನದ ಪರದೆಯನ್ನು ಕಳಚಿ ಜ್ಞಾನದ ಮಾರ್ಗವನ್ನು ಹಿಡಿಯಬಹುದು ಎನ್ನುವುದನ್ನು ಕೃಷ್ಣ ಇಲ್ಲಿ ವಿವರಿಸಿದ್ದಾನೆ. "ಜ್ಞಾನ ಎನ್ನುವುದು ಬೆಂಕಿಯಂತೆ. ಒಳಗಿರುವ ಜ್ಞಾನದ ಕಿಡಿಯನ್ನು ಸತತ ಅಂತರಂಗದ ಮನನದಿಂದ ಪ್ರಜ್ವಲಿಸು. ಆಗ ಅದು ಈ ಅಜ್ಞಾನವೆಂಬ ಪರದೆಯನ್ನು ಸುಟ್ಟುಬಿಡುತ್ತದೆ". ನಿರಂತರ ಅಂತರಂಗದ ಮನನ ಮಾತ್ರ ನಮ್ಮ ಅಂತರಂಗದ ಜ್ಞಾನವನ್ನು ಪ್ರಜ್ವಲಿಸಬಲ್ಲದು. ಹೊರಗಿನ ಶ್ರವಣ, ಅಧ್ಯಯನ ಇದಕ್ಕೆ ಪೂರಕ. ಒಮ್ಮೆ ಅಜ್ಞಾನದ ಪರದೆ ಸುಟ್ಟು ನಾಶವಾದಾಗ ನಮಗೆ ಸತ್ಯದ ಸಾಕ್ಷಾತ್ಕಾರವಾಗುತ್ತದೆ. ಇದರಿಂದ 'ನಾನು ಮಾಡಿದೆ' ಎನ್ನುವ ಅಹಂಕಾರ ಬರಲು ಸಾಧ್ಯವೇ ಇಲ್ಲ. ಈ ಜ್ಞಾನದ ಬೆಂಕಿ ಸೂರ್ಯ ಪ್ರಕಾಶಕ್ಕಿಂತ ದೊಡ್ಡದು ಎನ್ನುತ್ತಾನೆ ಕೃಷ್ಣ. ಹೇಗೆ ಹೊರ ಪ್ರಪಂಚವನ್ನು ಸೂರ್ಯ ಬೆಳಗಿಸುತ್ತಾನೋ  ಹಾಗೇ ಈ ಜ್ಞಾನ ಅಂತರಂಗ ಪ್ರಪಂಚವನ್ನು ಬೆಳಗಿಸುತ್ತದೆ. ಇದು ಅಪರೋಕ್ಷ ಜ್ಞಾನ ಹಾಗೂ ಈ ಜ್ಞಾನ ಭಗವಂತನ ಸಾಕ್ಷಾತ್ಕಾರ ಮಾಡಿಸುತ್ತದೆ.

ಕೃಷ್ಣನ ಈ ವಿವರಣೆಯನ್ನು ಕೇಳಿದಾಗ ನಮಗೆ ನಾವೂ ಅಪರೋಕ್ಷ ಜ್ಞಾನವನ್ನು ಪಡೆಯಬೇಕು ಅನ್ನಿಸುತ್ತದೆ. ಆದರೆ ಅದು ಹೇಗೆ? ಅಪರೋಕ್ಷ ಜ್ಞಾನ ಬರಬೇಕಾದರೆ ನಾವು  ಏನು ಮಾಡಬೇಕು? ಇದನ್ನು ಮುಂದಿನ ಶ್ಲೋಕದಲ್ಲಿ ಕೃಷ್ಣ ವಿವರಿಸಿದ್ದಾನೆ.

ತದ್ ಬುದ್ಧಯಸ್ತದಾತ್ಮಾನಸ್ತನ್ನಿಷ್ಠಾಸ್ತತ್ ಪರಾಯಣಾಃ ।
ಗಚ್ಛಂತ್ಯ ಪುನರಾವೃತ್ತಿಂ ಜ್ಞಾನನಿರ್ಧೂತಕಲ್ಮಷಾಃ   ॥೫.೧೭॥

ಅಜ್ಞಾನವನ್ನು ಅಳಿಸುವ ಮಾರ್ಗವನ್ನು ಕೃಷ್ಣ ಇಲ್ಲಿ ಸೊಗಸಾಗಿ ವಿವರಿಸಿದ್ದಾನೆ. ಮೊದಲನೆಯದಾಗಿ  ಭಗವಂತನಲ್ಲೇ ಬುದ್ಧಿಯನ್ನಿಡುವುದು(ತತ್ ಬುದ್ಧಯಃ); ನಮ್ಮ ಮನಸ್ಸು ಎಲ್ಲಾ ವಿಷಯಗಳನ್ನು ಗ್ರಹಿಸುತ್ತದೆ, ಬುದ್ಧಿ ತೀರ್ಮಾನ ಮಾಡುತ್ತದೆ. ನಾವು ಭಗವಂತನಲ್ಲಿ ಸ್ಥಿರವಾಗಿ ನಮ್ಮ ಬುದ್ಧಿಯನ್ನು ಇಟ್ಟರೆ ಆತ ನಮ್ಮ ಬುದ್ಧಿಯಲ್ಲಿ ಬಂದು ಕೂರುತ್ತಾನೆ. ಇದಕ್ಕಾಗಿ ನಾವು ಭಗವಂತನ ಕುರಿತಾಗಿ ನಮ್ಮ ಅರಿವನ್ನು ಬೆಳೆಸಿಕೊಳ್ಳಬೇಕು. ಭಗವಂತನ ವಿಷಯದ ನಿರಂತರ ಸಾಧನೆಯಿಂದ ನಾವು ಭಗವಂತನಲ್ಲಿ ನಮ್ಮ ಬುದ್ಧಿಯನ್ನು ನೆಲೆಗೊಳಿಸಿದಾಗ, ಭಗವಂತ ನಮ್ಮ ಬುದ್ಧಿಯಲ್ಲಿ ನೆಲೆಗೊಳ್ಳುತ್ತಾನೆ.

ಭಗವಂತನಿಗೆ ನಿನ್ನ  ಆತ್ಮವನ್ನು, ನಿನ್ನ ಮನಸ್ಸನ್ನು ಅರ್ಪಿಸು(ತತ್ ಆತ್ಮಾನಃ); ಅವನು ನಿನ್ನ  ಸ್ವಾಮಿಯಾಗಲಿ, ನೀನು  'ಭಗವಂತನೇ ಸದಾ ನನ್ನನ್ನು ಮಾರ್ಗದರ್ಶನ ಮಾಡುವ ಪ್ರಭು, ಅವನ ನಿಯಂತ್ರಣದಲ್ಲಿ ನನ್ನ ಬದುಕು ಮಾಂಗಲಿಕವಾಗಿ ನಡೆಯಲಿ’ ಎಂದು ನಿರಂತರ ಪ್ರಾರ್ಥನೆ ಮಾಡು.

ಭಗವಂತನಲ್ಲಿ ನಿಷ್ಠೆ(ತತ್ ನಿಷ್ಠಾಃ) ಇಲ್ಲದೇ ಇದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ನಿಷ್ಠಾ ಅಂದರೆ ಭಕ್ತಿ. ಆದ್ದರಿಂದ ಭಗವಂತನಲ್ಲಿ ಸದಾ ಭಕ್ತಿ ಇರಬೇಕು. ಭಕ್ತಿ ಇಲ್ಲದೆ ಧ್ಯಾನ, ಪೂಜೆ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ. ಒಮ್ಮೆ ನಮಗೆ ಭಗವಂತನ ಬಗ್ಗೆ ಜ್ಞಾನ ಬಂದರೆ ಭಕ್ತಿ ತನ್ನಷ್ಟಕ್ಕೆ ತಾನೇ ಬರುತ್ತದೆ. ಜ್ಞಾನವಿಲ್ಲದ ಭಕ್ತಿ-ಮೂಡಭಕ್ತಿ. ಜ್ಞಾನವಿದ್ದು ಭಕ್ತಿ ಇಲ್ಲದಿದ್ದರೆ(ಅಹಂಕಾರದಿಂದ)  ಆ ಜ್ಞಾನದಿಂದ ಯಾವ ಉಪಯೋಗವೂ ಇಲ್ಲ, ಅದು ಶುಷ್ಕ ಪಾಂಡಿತ್ಯವೆನಿಸುತ್ತದೆ.

ಹೀಗೆ ಮನಸ್ಸು-ಬುದ್ಧಿಯನ್ನು ಭಗವಂತನಲ್ಲಿ ನೆಲೆಸಿ ಜ್ಞಾನಪೂರ್ವಕ ಭಕ್ತಿಯನ್ನು ರೂಢಿಸಿಕೊಂಡಾಗ, ಎಲ್ಲಕ್ಕಿಂತ ದೊಡ್ಡ ಆಶ್ರಯ ಭಗವಂತ(ತತ್ ಪರಾಯಣಾಃ) ಎನ್ನುವ ಅರಿವು ಬರುತ್ತದೆ. ಇದರಿಂದ ಸಂಸಾರವೇ ಸರ್ವಸ್ವ ಎನ್ನುವ ಭ್ರಮೆ ಹೊರಟು ಹೋಗುತ್ತದೆ. ಪುರಂದರದಾಸರು ಹೇಳಿದಂತೆ: "ಅಲ್ಲಿದೆ ನಮ್ಮನೆ, ಇಲ್ಲಿರುವುದು ಸುಮ್ಮನೆ". ಅಂದರೆ ಈ  ಸಂಸಾರ ಶಾಶ್ವತ ಅಲ್ಲ ಹಾಗೂ ಯಾವಾಗ ಇಲ್ಲಿಂದ ಹೊರಡಬೇಕೋ ನಮಗೆ ಗೊತ್ತಿಲ್ಲ. ಹಾಗಿರುವಾಗ 'ನನ್ನದು' ಎನ್ನುವ ಅಹಂಕಾರ ಏಕೆ? ಇದು ಪಲಾಯನವಾದವಲ್ಲ, ನಾವು ಯಾವುದನ್ನೂ ಬಿಡಬೇಕಾಗಿಲ್ಲ, ಆದರೆ ಅದೇ ಸರ್ವಸ್ವ ಎನ್ನುವ ಭ್ರಮೆಯನ್ನು ಬಿಡುವುದು ಅಷ್ಟೇ. ಭಗವಂತ ಕೊಟ್ಟಿದ್ದಾನೆ, ಕೊಟ್ಟಷ್ಟು ಕಾಲ ಇಟ್ಟಷ್ಟು ಕಾಲ ಇರುವುದು. ಅದೇ ರೀತಿ  ಯಾವ ತತ್ತ್ವಾಭಿಮಾನಿ ದೇವತೆಗಳನ್ನೂ ನಾವು ತಿರಸ್ಕರಿಸಬಾರದು. ಅವರು ನಮಗೆ ಭಗವಂತನನ್ನು ಸೇರುವ ಮಾರ್ಗ ತೋರಿಸುವ ಭಗವಂತನ ಪರಿವಾರ, ಆದರೆ ಅವರೇ ಸರ್ವಸ್ವ ಅಲ್ಲ.

ಎಲ್ಲಕ್ಕಿಂತ ಮೇಲೆ ಎಲ್ಲರಿಗೂ ಆಶ್ರಯವಾಗಿರತಕ್ಕಂತಹ ಪರತತ್ವದ ಎಚ್ಚರದೊಂದಿಗೆ ನಿನ್ನ ಪಾಲಿಗೆ ಬಂದ ಕರ್ತವ್ಯವನ್ನು ಭಗವಂತನ ಪ್ರಸಾದವೆಂದು ಮಾಡು. ಓಡಿಹೋಗಬೇಡ, ಸಂಸಾರದಲ್ಲಿ ಬದುಕು, ಭಗವಂತ ಏನು ಕೊಟ್ಟ ಅದನ್ನು ಸ್ವೀಕರಿಸು. ನಿನ್ನೆಲ್ಲಾ ಸರ್ವಸ್ವವನ್ನು 'ಪರಮ ರಕ್ಷಕ ಭಗವಂತ' ಎಂದು ಅವನಲ್ಲಿ ಅರ್ಪಿಸು. ಹೀಗೆ ಬದುಕುವುದರಿಂದ, ನಮ್ಮ ಆತ್ಮಕ್ಕೆ ಅಂಟಿದ ಕೊಳೆ ತೊಳೆದು ಹೋಗುತ್ತದೆ, ಮನಸ್ಸು ಸ್ವಚ್ಛವಾಗುತ್ತದೆ. ಆಗ ಜ್ಞಾನ ಬೆಳಗುತ್ತದೆ - ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಇದರಿಂದ ಮತ್ತೆ ಮರಳಿ ಬಾರದ ಶಾಶ್ವತ ಮೋಕ್ಷವನ್ನು ಜೀವ ಪಡೆಯಬಲ್ಲ.

ಆಧಾರ - ಭಗವದ್ಗೀತೆ

ಸಂಬಂಧಿತ ವಿಷಯಗಳು
ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ?
ನಾವು ಮಾಡಿದ ಪಾಪ ಕರ್ಮದ ಫಲವನ್ನು ನಾವೇ ಅನುಭವಿಸಬೇಕು

ನಾವು ಮಾಡಿದ ಪಾಪ ಕರ್ಮದ ಫಲವನ್ನು ನಾವೇ ಅನುಭವಿಸಬೇಕು

ಇಲ್ಲಿ ಕೃಷ್ಣ ಹೇಳುತ್ತಾನೆ: "ಯಾರ ಪಾಪವನ್ನೂ ನೀನು ತೆಗೆದುಕೊಳ್ಳಲು ಬರುವುದಿಲ್ಲ ಹಾಗೂ ಇನ್ನೊಬ್ಬರ ಪುಣ್ಯ ನಮಗೆ ಸಿಗುವುದಿಲ್ಲ. ನಾವು ಏನು  ಅನುಭವಿಸುತ್ತೇವೇ ಅದು ನಾವು ಮಾಡಿದ  ಕರ್ಮಫಲ" ಎಂದು. 

ನಾSದತ್ತೇ ಕಸ್ಯಚಿತ್ ಪಾಪಂ ನ ಚೈವ ಸುಕೃತಂ ವಿಭುಃ ।
ಅಜ್ಞಾನೇನಾSವೃತಂ ಜ್ಞಾನಂ ತೇನ ಮುಹ್ಯಂತಿ ಜಂತವಃ     ॥೫.೧೫॥

ಈ ಶ್ಲೋಕವನ್ನು 'ಜೀವದ'  ಪರವಾಗಿ ಮತ್ತು 'ಭಗವಂತ'ನ ಪರವಾಗಿ ಎರಡು ರೂಪದಲ್ಲಿ ನೋಡಬಹುದು. ‘ಜೀವದ’ ಪರದಲ್ಲಿ ನೋಡಿದಾಗ ವಿಭುಃ ಎನ್ನುವ ಪದ ವಿಶಿಷ್ಟ, ವೈವಿಧ್ಯ, ವಿವಿಧ ಇತ್ಯಾದಿ ಅರ್ಥವನ್ನು ಕೊಡುತ್ತದೆ. ಜಡಕ್ಕಿಂತ ವಿಶಿಷ್ಟನಾಗಿ-ಇಚ್ಛೆ, ಯೋಚನೆ, ಜ್ಞಾನ ಇರುವ ಜೀವ ವಿಶಿಷ್ಟ. ಬೇರೆಬೇರೆ ಜನ್ಮದಲ್ಲಿ ಬೇರೆಬೇರೆ ಜೀವಿಯಾಗಿ ಹುಟ್ಟಬಹುದಾದ ಜೀವ, ಒಂದು ಜನ್ಮದಲ್ಲೇ ಅನೇಕ ವೈವಿಧ್ಯತೆಯನ್ನು ಕಾಣಬಹುದು. ಉದಾಹರಣೆಗೆ: ಮನುಷ್ಯನಾದವನು ಶ್ರೀಮಂತನಾಗಿ ಸುಖದ ಸುಪ್ಪತ್ತಿಗೆಯಲ್ಲಿ ಬದುಕಬಹುದು, ದಾರಿದ್ರ್ಯದಲ್ಲಿರಬಹುದು. ದೊಡ್ಡ ವಿದ್ವಾಂಸನಾಗಿ ಬದುಕಬಹುದು ಅಥವಾ ಏನೂ ಅರಿವಿಲ್ಲದ ಮೂಢನಾಗಿ ಬದುಕಬಹುದು. ಈ ರೀತಿಯ ವೈವಿದ್ಯತೆ ಜೀವದಲ್ಲಿದೆ-ಅದಕ್ಕಾಗಿ ಜೀವ ವಿಭುಃ. 

ಒಂದೇ ಜನ್ಮದಲ್ಲಿ ಹುಟ್ಟಿ ಸಾಯುವ ತನಕ ಅನೇಕ ಮಜಲುಗಳಲ್ಲಿ ಅನೇಕ ವೈವಿಧ್ಯತೆಯನ್ನು ನಾವು ಅನುಭವಿಸಬಹುದು. ಶ್ರೀಮಂತನಾಗಿದ್ದವನು ಎಲ್ಲವನ್ನೂ ಕಳೆದುಕೊಂಡು ದಾರಿದ್ರ್ಯವನ್ನು ಪಡೆಯಬಹುದು. ಹೀಗಾದಾಗ ನಾವು ಅದರ ಹಿಂದೆ ಏನೇನೋ ಕಾರಣಗಳನ್ನು ಹುಡುಕುತ್ತೇವೆ. ಸಾಮಾನ್ಯವಾಗಿ ನಾವು ಮಾಡುವ ಮೊದಲ ಕೆಲಸ ಯಾವುದೋ ಜ್ಯೋತಿಷಿಗಳಲ್ಲಿ ಹೋಗಿ ಪ್ರಶ್ನೆ ಹಾಕುವುದು. ಹಾಗೆ ಕೇಳಿದಾಗ ಅವರು ಯಾರೋ ವಾಮಾಚಾರ (Witchcraft) ಮಾಡಿದ್ದರಿಂದ ನೀನು ನಷ್ಟ ಅನುಭವಿಸುತ್ತಿರುವುದು ಇತ್ಯಾದಿಯಾಗಿ ಹೇಳುತ್ತಾರೆ. ಆದರೆ ಇಲ್ಲಿ ಕೃಷ್ಣ ಹೇಳುತ್ತಾನೆ: "ಯಾರ ಪಾಪವನ್ನೂ ನೀನು ತೆಗೆದುಕೊಳ್ಳಲು ಬರುವುದಿಲ್ಲ ಹಾಗೂ ಇನ್ನೊಬ್ಬರ ಪುಣ್ಯ ನಮಗೆ ಸಿಗುವುದಿಲ್ಲ. ನಾವು ಏನು  ಅನುಭವಿಸುತ್ತೇವೇ ಅದು ನಾವು ಮಾಡಿದ  ಕರ್ಮಫಲ" ಎಂದು. ಈ ಕಾರಣದಿಂದ ಇನ್ನೊಬ್ಬರಿಂದ ನಾವು ಹಾಳಾದೆವು ಎಂದು ತಿಳಿಯುವುದು ತಪ್ಪು ಎನ್ನುವುದು ಇಲ್ಲಿ ಸ್ಪಷ್ಟ. ಹಾಗಿದ್ದರೆ ವಾಮಾಚಾರ ಇತ್ಯಾದಿ ಮಾಡಲು ಬರುವುದಿಲ್ಲವೋ, ಅದರಿಂದ ತೊಂದರೆ ಆಗುವುದು ಸುಳ್ಳೋ, ಎಂದರೆ - ನಮ್ಮ ಸುಕೃತದ ಫಲ ನಮ್ಮನ್ನು ರಕ್ಷಣೆ ಮಾಡುವಷ್ಟು ಕಾಲ ಯಾವ ವಾಮಾಚಾರವೂ ನಮ್ಮನ್ನು ಏನೂ ಮಾಡುವುದಿಲ್ಲ. ಇದನ್ನು ಜ್ಯೋತಿಷಿಗಳು "ನಿಮ್ಮ ಗ್ರಹಗತಿ ಚೆನ್ನಾಗಿತ್ತು ಆದ್ದರಿಂದ ಈವರೆಗೆ ಏನೂ ಆಗಿಲ್ಲ, ಆದರೆ ಈಗ ಅದು ಕೆಟ್ಟಿದೆ" ಇತ್ಯಾದಿಯಾಗಿ ಹೇಳುತ್ತಾರೆ. ಇಲ್ಲಿ ಗ್ರಹಗತಿ ಕೆಟ್ಟಿದೆ ಎಂದರೆ ನಮ್ಮ ಪಾಪದ ಫಲ ಪಕ್ವವಾಗಿದೆ ಎಂದರ್ಥ. ಆದ್ದರಿಂದ ಯಾರು ನಮ್ಮ ಮೇಲೆ ಕೃತ್ರಿಮ ಪ್ರಯೋಗ ಮಾಡಿದರೂ, ಅದರಿಂದ ನಮಗೆ ಅನಿಷ್ಠವಾಗಬೇಕಾದರೆ ನಾವು ಹಿಂದೆ ಅನಿಷ್ಠಕರ್ಮ ಮಾಡಿರಬೇಕು. ಅದರ ಫಲವಾಗಿ ಇಲ್ಲಿ ನಮಗೆ ಅದು ಅನುಭವಕ್ಕೆ ಬರುತ್ತದೆ. ನಮ್ಮ ದೋಷಗಳು, ನಮ್ಮ ಬಡತನ, ನಮ್ಮ ಅಜ್ಞಾನ, ರೋಗ-ರುಜಿನ ಇತ್ಯಾದಿಗಳಿಗೆ  ಇನ್ನೊಬ್ಬರನ್ನು ತೋರಿಸುವುದು, ಅವರಿಂದ ಹೀಗಾಯ್ತು ಎನ್ನುವುದು ತಪ್ಪು. ನಮಗೆ ರೋಗ ಉಲ್ಬಣವಾಗಿ ಅದನ್ನು ಅನುಭವಿಸುವ ಪ್ರರಾಬ್ಧಕರ್ಮ ಇದ್ದರೆ ಅದನ್ನು ಯಾರಿಂದಲೂ ತಪ್ಪಿಸಲು ಬರುವುದಿಲ್ಲ. ಇದಕ್ಕಾಗಿ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ತಪ್ಪು. ಯಾರೋ ಮಾಡಿದ ಪಾಪಕರ್ಮದ ಫಲವನ್ನು ನಾನು ಅನುಭವಿಸುವುದಿಲ್ಲ. ನಾನು ಮಾಡಿದ ಪಾಪ ಕರ್ಮದ ಫಲವನ್ನೇ ನಾನು ಅನುಭವಿಸುವುದು.

ಭಕ್ತನ ಪರ ಪುರೋಹಿತ ಮಾಡುವ ಕರ್ಮ ಭಕ್ತನಿಗೆ ಬರುತ್ತದೆ; ತಂದೆಯ ಪರ ಮಗ ಮಾಡುವ ಕರ್ಮ ತಂದೆಗೆ ಬರಬಹುದು. ಇದು ಒಬ್ಬರ ಪರ ಇನ್ನೊಬ್ಬರು ಮಾಡಿದ ಕರ್ಮ. ಈ ವಿಚಾರವನ್ನು ಹೊರತುಪಡಿಸಿದರೆ (Exception) ನಾವು ಅನುಭವಿಸುವುದು ನಾವೇ ಮಾಡಿದ ಕರ್ಮಫಲವೇ ಹೊರತು ಇನ್ನೊಬ್ಬರದ್ದಲ್ಲ.

ಜನರಿಗೆ ಸರಿಯಾದ ಅರಿವಿಲ್ಲದ ಕಾರಣ  'ಇನ್ನೊಬ್ಬರಿಂದ ನನಗೆ ತೊಂದರೆ ಆಯ್ತು' ಎಂದು ತಿಳಿಯುತ್ತಾರೆ. ಇದಕ್ಕೆಲ್ಲಾ ಮೂಲಕಾರಣ ಕರ್ಮದ ಬಗ್ಗೆ,  ಜೀವದಬಗ್ಗೆ, ಪರಮಾತ್ಮನ ಬಗ್ಗೆ ಸರಿಯಾದ ಅರಿವು ಇಲ್ಲದಿರುವುದು. ಜ್ಞಾನವೆನ್ನುವುದು ಅಜ್ಞಾನದ ಮುಸುಕಿನಲ್ಲಿ ಮುಚ್ಚಿಹೋಗಿ ಅದರಿಂದ ತಪ್ಪು ತಿಳುವಳಿಕೆ ಹಾಗೂ ಮೋಹದ ಭ್ರಾಂತಿ ನಮ್ಮನ್ನು ಆವರಿಸಿರುವುದು.

ಈ ಶ್ಲೋಕದ  ಇನ್ನೊಂದು ಮುಖ ನೋಡಿದರೆ 'ವಿಭುಃ' ಅಂದರೆ ಸರ್ವಸಮರ್ಥನಾದ, ಸರ್ವಗತನಾದ ಭಗವಂತ. ಈ ಅರ್ಥದಲ್ಲಿ ನೋಡಿದಾಗ: ಭಗವಂತನಿಗೆ ಯಾವ ಕರ್ಮದ ಲೇಪವೂ ಇಲ್ಲ. ಆತ ಜೀವ ಸ್ವರೂಪದಲ್ಲಿನ ಅಂತರವನ್ನು ಗುರುತಿಸಿ ಅದಕ್ಕೆ ತಕ್ಕಂತೆಯೇ ಬೆಳವಣಿಗೆಯನ್ನು ಕೊಡುತ್ತಾನೆ. ಆತ ಎಂದೂ ಪಕ್ಷಪಾತಿ ಅಲ್ಲ. (Equal treatment of unequal is discrimination). ಪಾಪ-ಪುಣ್ಯ ಎರಡರ ಲೇಪವೂ ಆತನಿಗಿಲ್ಲ. ಆದರೆ ಭಗವಂತನ ಈ ಕರ್ಮಸಿದ್ಧಾಂತ, ಆತನ ಸರ್ವಸಮರ್ಥತೆ, ಮತ್ತು ಅವನ ನಿರ್ಲಿಪ್ತತೆ, ಇದರ ಅರಿವು ಬಹಳ ಜನಕ್ಕೆ ತಿಳಿದಿಲ್ಲ-ಆದ್ದರಿಂದ ಭಗವಂತನ ಬಗೆಗೆ ಗೊಂದಲಕ್ಕೊಳಗಾಗುತ್ತಾರೆ.

ಆಧಾರ : ಭಗವದ್ಗೀತೆ 

ಸಂಬಂಧಿತ ವಿಷಯಗಳು
ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ ಎಲ್ಲಾ ಸಾಧನೆ ವ್ಯರ್ಥವೇ?
ಎಲ್ಲವನ್ನೂ ಭಗವಂತನೇ ಮಾಡುವುದಾದರೆ ಪಾಪ ಕರ್ಮಗಳು ನಮಗೇಕೆ?